ರಾಜ್ಯದಲ್ಲಿ ನಿಜಕ್ಕೂ ಮುಖ್ಯಮಂತ್ರಿ ಬದಲಾಗುತ್ತಾರಾ..?
ಉನ್ನತ ಮೂಲಗಳ ಪ್ರಕಾರ ಮುಖ್ಯಮಂತ್ರಿ ಹುದ್ದೆ ತೊರೆಯಲಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಸಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪ ಮಾಡಲಿದ್ದು ಅದಕ್ಕೆ ಉಳಿದ ಶಾಸಕರು ಅನುಮೋದನೆ ನೀಡಲಿದ್ದಾರೆ ಈ ಮೂಲಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆದರೂ ಕೂಡ ಪಕ್ಷ ಮತ್ತು ಸರ್ಕಾರದಲ್ಲಿ ತಮ್ಮದೇ ಆದ ಹಿಡಿತ ಹೊಂದಲು ಅವಕಾಶ ಕಲ್ಪಿಸಲಾಗುವುದೆಂದು ಹೇಳಲಾಗಿದೆ.

ʼ ಬೆವರ ಹನಿʼ ವಿಶೇಷ
ಅರ್.ಹೆಚ್. ನಟರಾಜ್
ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರ ಇದೀಗ ಏಕಾಏಕಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆಯಲ್ಲಿ ಯೋಧರನ್ನು ಗೌರವಿಸುವ ಸಲುವಾಗಿ ಕಾಂಗ್ರೆಸ್ ಏರ್ಪಡಿಸಿದ್ದ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಕಳೆದ ರಾತ್ರಿ ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಸಿರುವ ಮಾತುಕತೆ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು. ಅಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ತನ್ನ ನಾಯಕನನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿತ್ತು. ಪಕ್ಷದ ಹೈಕಮಾಂಡ್ ಒಲವು ಕೂಡಾ ಸಿದ್ದರಾಮಯ್ಯ ಪರವಾಗೇ ಇತ್ತು ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಆದರೆ ಈ ಪ್ರಕ್ರಿಯೆಗೂ ಮುನ್ನ ದಿಲ್ಲಿಯಲ್ಲಿ ಹೈಕಮಾಂಡ್ ಮುಂದೆ ಒಂದು ಅಲಿಖಿತ ಒಪ್ಪಂದ ನಡೆದಿತ್ತು, ಆ ಒಪ್ಪಂದದಂತೆ ಮೊದಲ ಎರಡು ವರ್ಷ ಸಿದ್ದರಾಮಯ್ಯ ಉಳಿದ ಅವಧಿಗೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ತಣ್ಣಗೆ ಹರಡ ತೊಡಗಿತು. ಕಾಂಗ್ರೆಸ್ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಈ ಒಪ್ಪಂದದ ಬಗ್ಗೆ ಇಲ್ಲಿಯವರೆಗೂ ಯಾರೂ ಅಧಿಕೃತವಾಗಿ ಮಾತನಾಡಿಲ್ಲ. ಹಾಗೆಯೇ ಯಾರು ಕೂಡ ಇಂತಹ ಒಪ್ಪಂದ ಏರ್ಪಟ್ಟಿಲ್ಲ ಎಂದು ಸಹ ಹೇಳುತ್ತಿಲ್ಲ ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಗೆ ರಾಜಿ ಸೂತ್ರ ಏರ್ಪಟ್ಟಿದೆ ಎಂಬ ಮಾತುಗಳು ಮಾತ್ರ ಬಲವಾಗಿ ಕೇಳಿ ಬರುತ್ತಿದೆ. ಇದೇ ಅಂಶವು ರಾಜ್ಯದ ಟಿವಿ ಚಾನೆಲ್ಗಳ ಪಾಲಿನ ರಸಕವಳವೂ ಆಗಿಬಿಟ್ಟಿತು.
ಇದೀಗ ಈ ರಾಜಿಸೂತ್ರಕ್ಕೆ ಮತ್ತಷ್ಟು ರೆಕ್ಕೆ ಪುಕ್ಕಗಳು ಬಂದಿವೆ. ರಾಜ್ಯ ಸರ್ಕಾರ ಎರಡು ವರ್ಷ ಅವಧಿ ಪೂರ್ಣಗೊಳಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ20ರಂದು ಏರ್ಪಡಿಸಿದ್ದ ಸಾಧನಾ ಸಮಾವೇಶದಲ್ಲಿ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವೇದಿಕೆಯಲ್ಲಿಯೇ ಈ ಕುರಿತು ಚರ್ಚೆ ನಡೆಸುವ ಮೂಲಕ ಗಮನ ಸೆಳೆದಿದ್ದರು. ಆದರೆ ಅಂದು ಈ ಕುರಿತಂತೆ ಯಾವುದೇ ರೀತಿಯ ಹೇಳಿಕೆ ಅವರ ಬಿದ್ದಿರಲಿಲ್ಲ ಆದರೆ ಇದೀಗ ವೇಣುಗೋಪಾಲ್ ಮತ್ತು ಸುರ್ಜೇವಾಲ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುದೀರ್ಘ ಮಾತುಕತೆ ನಡೆಸಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಈ ವೇಳೆ ಉಭಯ ನಾಯಕರು ಬರುವ ನವೆಂಬರ್ ವೇಳೆಗೆ ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಇದಕ್ಕಾಗಿ ಹೈಕಮಾಂಡ್ ರಾಜಿ ಸೂತ್ರ ಒಂದನ್ನು ಹೆಣೆದಿದೆ. ಆ ಪ್ರಕಾರ ಮುಖ್ಯಮಂತ್ರಿ ಸ್ಥಾನ ತೊರೆಯಲಿರುವ ಸಿದ್ದರಾಮಯ್ಯ ಅವರಿಗಾಗಿ ಉನ್ನತ ಹುದ್ದೆಯೊಂದನ್ನು ಸೃಷ್ಟಿ ಮಾಡಲಾಗುವುದು, ಹಾಗೆಯೇ ಪಕ್ಷದಲ್ಲಿ ಅವರಿಗೆ ಮಹತ್ವದ ಜವಾಬ್ದಾರಿ ನೀಡಿ ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ನಡೆಸುವಂತೆ ವ್ಯವಸ್ಥೆ ಮಾಡಲಾಗುವುದು, ಈ ಸಂಧಾನ ಸೂತ್ರಕ್ಕೆ ನೀವು ಬದ್ದರಾಗಬೇಕು ಎಂದು ಶಿವಕುಮಾರ್ ಅವರಿಗೆ ಹೈಕಮಾಂಡ್ ಸೂಚನೆ ನೀಡಿರುವುದಾಗಿ ಗೊತ್ತಾಗಿದೆ.
ರಾತ್ರಿ ನಡೆದ ಸಭೆಯ ನಂತರದಲ್ಲಿ ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆದಿದ್ದು ಅಧಿಕಾರ ಹಸ್ತಾಂತರ ಪ್ರಕ್ರಿಯೆ ಮತ್ತು ವಿಧಾನ ಪರಿಷತ್ ನಾಮನಿರ್ದೇಶನ ಕುರಿತಂತೆ ಚರ್ಚೆ ಮಾಡಲಾಯಿತಂತೆ.
ಈ ವೇಳೆ ಖರ್ಗೆ ಅವರು ಈ ಹಿಂದೆ ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಮಾತುಕತೆಯಂತೆ ಅಧಿಕಾರ ಹಸ್ತಾಂತರ ನಡೆಯಬೇಕು. ಆದರೆ ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲ ಮತ್ತು ಅಪಸ್ವರಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು. ಪ್ರಕ್ರಿಯೆ ಮುಗಿಯುವವರೆಗೂ ಯಾರೂ ಕೂಡ ಮಾಧ್ಯಮಗಳಲ್ಲಿ ಈ ಕುರಿತಂತೆ ಚರ್ಚೆ ನಡೆಸುವ ಮೂಲಕ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿರುವುದಾಗಿ ಗೊತ್ತಾಗಿದೆ.
ಉನ್ನತ ಮೂಲಗಳ ಪ್ರಕಾರ ಮುಖ್ಯಮಂತ್ರಿ ಹುದ್ದೆ ತೊರೆಯಲಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಸಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪ ಮಾಡಲಿದ್ದು ಅದಕ್ಕೆ ಉಳಿದ ಶಾಸಕರು ಅನುಮೋದನೆ ನೀಡಲಿದ್ದಾರೆ ಈ ಮೂಲಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆದರೂ ಕೂಡ ಪಕ್ಷ ಮತ್ತು ಸರ್ಕಾರದಲ್ಲಿ ತಮ್ಮದೇ ಆದ ಹಿಡಿತ ಹೊಂದಲು ಅವಕಾಶ ಕಲ್ಪಿಸಲಾಗುವುದೆಂದು ಹೇಳಲಾಗಿದೆ.
ಹೆಚ್.ಸಿ.ಮಹಾದೇವಪ್ಪ ಪ್ರವೇಶ
ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿಯ ಪಾಳಯದಲ್ಲಿ ಪರ್ಯಾಯ ರಾಜಕೀಯ ತಂತ್ರಗಾರಿಕೆಯನ್ನು ಹೆಣೆಯಲಾಗುತ್ತಿದೆ. ಯಾವುದೇ ಕಾರಣಕ್ಕೂ ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು. ಒಂದು ವೇಳೆ ಅಂತಹ ಅನಿವಾರ್ಯತೆ ಉಂಟಾದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದು ಅಲ್ಲಿಯೇ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಬೇಕು ಎಂಬ ಒತ್ತಡವನ್ನು ಹೈಕಮಾಂಡ್ ಮೇಲೆ ಹೇರಲು ಸಿದ್ಧತೆ ನಡೆದಿದೆ.
ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಿದ್ದು ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವ ಶಾಸಕರೂ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ತಮ್ಮ ನಾಯಕ ಎಂದು ಒಪ್ಪಲು ಸಿದ್ದರಿಲ್ಲ. ಈ ಅವಕಾಶವನ್ನು ಬಳಸಿಕೊಂಡು ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರೆಯಲು ತಂತ್ರ ರೂಪಿಸಿದ್ದಾರೆ ಎಂದು ಗೊತ್ತಾಗಿದೆ.
ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಈ ಮಾತಿಗೆ ಒಪ್ಪದೇ ಸರ್ಕಾರ ರಚನೆಯಾದ ಸಮಯದಲ್ಲಿ ಆದ ಒಪ್ಪಂದದಂತೆ ಅಧಿಕಾರ ಹಸ್ತಾಂತರವಾಗಬೇಕು ಎಂಬ ವಾದ ಮಂಡಿಸಿದರೆ, ಆಗ ದಲಿತ ಮುಖ್ಯಮಂತ್ರಿ ಎಂಬ ಹಳೆಯ ವಾದ ಮಂಡಿಸಲು ಸಿದ್ಧತೆ ನಡೆದಿದೆಯಂತೆ. ಈ ಹಿಂದೆ ಇಂತಹ ಪ್ರಯತ್ನ ನಡೆದಿದ್ದು ಗೃಹ ಮಂತ್ರಿ ಪರಮೇಶ್ವರ್ ಮತ್ತು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹಲವು ಸಭೆಗಳು ನಡೆದಿದ್ದವು. ರಾಜ್ಯದಲ್ಲಿ ಇಲ್ಲಿಯವರೆಗೆ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ದೊರಕಿಲ್ಲ. ಕಾಂಗ್ರೆಸ್ ಇಂತ ಒಂದು ಐತಿಹಾಸಿಕ ಕ್ರಮಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಲಾಗುವುದಂತೆ.
ಸುಧೀರ್ಘ ಒಂಬತ್ತು ವರ್ಷಗಳ ಕಾಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ 2013ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಡಾ.ಜಿ. ಪರಮೇಶ್ವರ ಅವರಿಗೆ ಈ ಬಾರಿ ಉನ್ನತ ಹುದ್ದೆ ಲಭಿಸಬೇಕು ಎಂದು ವಾದ ಮಂಡಿಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ವಾದವನ್ನು ಬೆಂಬಲಿಸಿದ್ದರು. ಆದರೆ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇತ್ತೀಚಿನ ಜಾರಿ ನಿರ್ದೇಶನಾಲಯದ ದಾಳಿ ಹಿನ್ನೆಲೆಯಲ್ಲಿ ಪರಮೇಶ್ವರ ಹೆಸರು ತೆರೆಮರೆಗೆ ಸರಿದಿದೆ. ಹೀಗಾಗಿ ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ದಲಿತ ಸಮುದಾಯದ ಹಿರಿಯ ನಾಯಕ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರ ಹೆಸರು ಮುನ್ನೆಲೆಗೆ ಬಂದಿದೆ.
ಮಹಾದೇವಪ್ಪ ಅವರು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ್ದು ಈ ವರ್ಗ ಕಾಂಗ್ರೆಸ್ ನ ಪ್ರಬಲ ಮತ ಬ್ಯಾಂಕ್ ಆಗಿದೆ ಜೊತೆಗೆ, ಮಹಾದೇವಪ್ಪ ಅವರು ಸಂವಿಧಾನ ನಡಿಗೆ ಹಾಗೂ ಸರ್ಕಾರದ ಎಲ್ಲ ಕಚೇರಿಗಳಲ್ಲೂ ಸಂವಿಧಾನದ ಪೀಠಿಕೆ ಅಳವಡಿಸುವ ತೀರ್ಮಾನದ ಮೂಲಕ ಹೈಕಮಾಂಡ್ ಗಮನ ಸೆಳೆದಿದ್ದಾರೆ ಜೊತೆಗೆ ಸಂಘ ಪರಿವಾರ ಮತ್ತು ಬಿಜೆಪಿಯ ಕಟು ಟೀಕಾಕಾರವಾಗಿಯೂ ಕೂಡ ಗಮನ ಸೆಳೆದಿರುವ ಮಹಾದೇವಪ್ಪ ಅವರ ಹೆಸರನ್ನು ಪ್ರಸ್ತಾಪಿಸಿದರೆ ಹೈಕಮಾಂಡ್ ಕೂಡ ಸಮ್ಮತಿಸಬಹುದು ಎನ್ನುವುದು ಈ ಪಾಳಯದ ಲೆಕ್ಕಾಚಾರವಾಗಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ವಾರದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯದಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು ಕುತೂಹಲ ಮೂಡಿಸಿದೆ.