ಕಾರ್ಯಕರ್ತರ ಸದಸ್ಯತ್ವ ನೊಂದಣಿಗೆ ಹೆಚ್ಚು ಒತ್ತು ನೀಡಬೇಕು: ಕೆ.ಪಿ.ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾರ್ಯಕರ್ತರ ಸದಸ್ಯತ್ವ ನೊಂದಣಿಗೆ ಹೆಚ್ಚು ಒತ್ತು ನೀಡಬೇಕು: ಕೆ.ಪಿ.ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾರ್ಯಕರ್ತರ ಸದಸ್ಯತ್ವ ನೊಂದಣಿಗೆ ಹೆಚ್ಚು ಒತ್ತು ನೀಡಬೇಕು: ಕೆ.ಪಿ.ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್


ಕಾರ್ಯಕರ್ತರ ಸದಸ್ಯತ್ವ ನೊಂದಣಿಗೆ ಹೆಚ್ಚು ಒತ್ತು ನೀಡಬೇಕು: ಕೆ.ಪಿ.ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್


ತುಮಕೂರು: ಮುಂಬರುವ ಚುನಾವಣೆಯಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿಗೆ ಒತ್ತು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದರು.‌


ಮುಂಬರುವ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನರೇ ತೀರ್ಮಾನಿಸಿದ್ದು, ಜನರ ಬಳಿಗೆ ತೆರಳುವ ಕೆಲಸವನ್ನು ನಾವು ಮಾಡುವ ಮೂಲಕ ಅಧಿಕಾರ ಪಡೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ ಎಂದರು.
ನಗರದ ಧಾನಃಪ್ಯಾಲೇಸ್‌ನಲ್ಲಿ ನಗರದ ಮೇಕೆದಾಟು ಪಾದಯಾತ್ರೆ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 


ಪಕ್ಷದ ಬಲವರ್ಧನೆಗಾಗಿ ಪ್ರತಿಯೊಬ್ಬರೂ ಶ್ರಮಿಸುವ ಅಗತ್ಯವಿದೆ. ಹಾಗಾಗಿ 12 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿಯೂ ಡಿಜಿಟಲ್ ಸದಸ್ಯತ್ವ ನೊಂದಣಿಗೆ ಪ್ರಥಮ ಬಾರಿಗೆ ಅವಕಾಶ ನೀಡಲಾಗಿದ್ದು, ಪ್ರತಿಯೊಂದು ಬೂತ್ ಮಟ್ಟದಲ್ಲಿ 2-3 ಆಯ್ಕೆ ಮಾಡಿ ಸದಸ್ಯತ್ವ ನೊಂದಣಿಗೆ ಶೀಘ್ರವೇ ಮುಂದಾಗುವAತೆ ಅವರು ತಿಳಿಸಿದರು.


ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ಮುಖಂಡರು 5 ರೂ. ನೀಡಿ ಸದಸ್ಯತ್ವ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ. ಜತೆಗೆ ಡಿಜಿಟಲ್ ಸದಸ್ಯತ್ವಕ್ಕೂ ಒತ್ತು ನೀಡಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯ ಸಾಧನೆ, ಇತಿಹಾಸವನ್ನು ಮನಮುಟ್ಟುವಂತೆ ಜನರಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.


ಮೇಕೆದಾಟು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ನೀರು ಒದಗಿಸುವ ಸಲುವಾಗಿಯೇ ಯೋಜನೆಯನ್ನು ರೂಪಿಸಲಾಗಿತ್ತು. ಅದರ ಅನುಷ್ಠಾನಕ್ಕಾಗಿ ಈಗ ಹೋರಾಟಕ್ಕೆ ಮುಂದಾಗಿದ್ದೇವೆ ಎಂದ ಅವರು, ನಾಡು-ನುಡಿ, ಜಲದ ವಿಚಾರದಲ್ಲಿ ತಾರತಮ್ಯ ಮಾಡದೇ ಎಲ್ಲರೂ ಒಗ್ಗಟ್ಟಾಗಿ ಈ ಐತಿಹಾಸಿಕ ಹೋರಾಟಕ್ಕೆ ಸಾಕ್ಷಿಯಾಗಬೇಕು ಎಂದರು.


ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಮಾತನಾಡಿ,  ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿತ್ತು. ಈ ಪಾದಯಾತ್ರೆ ಇಡೀ ದೇಶದ ಗಮನ ಸೆಳೆದಿತ್ತು. ಆದರೆ ಬಿಜೆಪಿ ಸರ್ಕಾರ ಕೊರೊನಾ ನೆಪವೊಡ್ಡಿ ಪಾದಯಾತ್ರೆಗೆ ತಡೆಯೊಡ್ಡಲು ಪ್ರಯತ್ನಿಸಿತ್ತು. ಆದರೆ ಜನತೆಯ ಹಿತದೃಷ್ಟಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕವಾಗಿ ತಡೆ ನೀಡಿದ್ದು, ಫೆ. 28 ರಂದು ಮತ್ತೆ ಪಾದಯಾತ್ರೆಗೆ ಚಾಲನೆ ನೀಡುತ್ತಿದ್ದು, ಜಿಲ್ಲೆಯಿಂದ 10 ಸಾವಿರಕ್ಕೂ ಅಧಿದ ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.


ಮಾಜಿ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಪಕ್ಷದ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಹಾಗೆಯೇ ಡಿಜಿಟಲ್ ಅಭಿಯಾನಕ್ಕೂ ವರಿಷ್ಠರ ಆಶಯದಂತೆ ಒತ್ತು ನೀಡಿ ತುಮಕೂರು ನಗರ ಕ್ಷೇತ್ರದಿಂದ ಅತಿಹೆಚ್ಚು ಕಾರ್ಯಕರ್ತರನ್ನು ನೋಂದಣಿ ಮಾಡಿಸಲು ಶ್ರಮಿಸುವುದಾಗಿ ಹೇಳಿದರು.


ಮತ್ತೆ ಪುನರಾರಂಭವಾಗುವ ಮೇಕೆದಾಟು ಯೋಜನೆ ಪಾದಯಾತ್ರೆಯಲ್ಲಿ ನಗರ ಕ್ಷೇತ್ರದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಈ ಹೋರಾಟದ ಯಶಸ್ವಿಗೆ ಮುಂದಾಗುವುದಾಗಿ ತಿಳಿಸಿದರು.


ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ, ಶಾಸಕ ರಂಗನಾಥ್, ಮಾಜಿ ಶಾಸಕ ಡಾ. ರಫೀಕ್ ಅಹಮದ್, ಎಸ್. ಷಫಿ ಅಹಮದ್, ಆರ್. ನಾರಾಯಣ್, ಜಿಲ್ಲಾಧ್ಯಕ್ಷ ರಾಮಕೃಷ್ಣ, ಮುಖಂಡ ಇಕ್ಬಾಲ್ ಅಹಮದ್, ಪಾವಗಡ ಕಾಂಗ್ರೆಸ್ ಮುಖಂಡ ವೆಂಕಟೇಶ್, ಯುವ ಮುಖಂಡ ಶಶಿ ಹುಲಿಕುಂಟೆ ಮತ್ತಿತರರು ಪಾಲ್ಗೊಂಡಿದ್ದರು.